< ಜ್ಞಾನೋಕ್ತಿಗಳು 19 >
1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.
೧ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
2 ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.
೨ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
೩ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
4 ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ.
೪ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
5 ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.
೫ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
6 ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
೬ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.
೭ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.
೮ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
9 ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.
೯ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
10 ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.
೧೦ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
11 ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.
೧೧ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
೧೨ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ.
೧೩ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
14 ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
೧೪ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.
೧೫ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
16 ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.
೧೬ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
17 ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.
೧೭ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.
೧೮ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
19 ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.
೧೯ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.
೨೦ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
21 ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
೨೧ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.
೨೨ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
23 ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.
೨೩ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
24 ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!
೨೪ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
25 ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.
೨೫ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
26 ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.
೨೬ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.
೨೭ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
28 ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.
೨೮ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
29 ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
೨೯ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.